ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. 11 ಸಮೀಕ್ಷೆಗಳ ಪೈಕಿ 8 ಸಮೀಕ್ಷೆಗಳು ಕಾಂಗ್ರೆಸ್ ಪರ ಹಾಗೂ 3 ಸಮೀಕ್ಷೆಗಳು ಬಿಜೆಪಿ ಪರ ಭವಿಷ್ಯ ನುಡಿದಿವೆ. ಅಂತಿಮವಾಗಿ ಶನಿವಾರ ಫಲಿತಾಂಶ ಹೊರಬೀಳಲಿದ್ದು, ಈ ವೇಳೆ ಯಾವ ಪಕ್ಷ 113 ಸಂಖ್ಯೆಯನ್ನು ದಾಟಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಚುನಾವಣಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಖರ್ಗೆ ನಿವಾಸಕ್ಕಿ ಕೈ ನಾಯಕರು ಸಭೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದಾರೆ.
ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಭೇಟಿ ನೀಡಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಸಭೆಗೂ ಮುನ್ನ ಆರ್’ಟಿ ನಗರದ ತಮ್ಮ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಚುನಾವಣೆಗೆ ಮುಂಚೆ, ನಂತರ ಯಾವುದೇ ಇರಲಿ. ಸಮೀಕ್ಷೆಗಳು ಏನೇ ಹೇಳಿರಲಿ. ನನ್ನದು ಆಗಲೂ ಈಗಲೂ ಒಂದೇ ಮಾತು. ಅದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ. ಗ್ರೌಡ್ ರಿಪೋರ್ಟ್ ಕೂಡ ಅದೇ ಹೇಳುತ್ತದೆ ಎಂದು ಹೇಳಿದರು.