ಬೆಂಗಳೂರು: ಚುನಾವಣ ರಾಜಕಾರಣದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ತಮ್ಮ ಕಾರ್ಯಕ್ಷೇತ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಮತ್ತೆ ಘೋಷಣೆ ಮಾಡಿದ್ದಾರೆ.
ವಿಧಾನಸಭೆ ಕಲಾಪದ ಬಳಿಕ ಅಂಬೇಡ್ಕರ್ ಪ್ರತಿಮೆ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ವಿಧಾನಸೌಧದಿಂದ ನಡೆದುಕೊಂಡೇ ಬಂದು ಗಾಂಧಿ ಪ್ರತಿಮೆಗೆ ಅವರು ನಮನ ಸಲ್ಲಿಸಿದರು. ಶಿಕಾರಿಪುರಕ್ಕೆ ಬಹುತೇಕ ವಿಜಯೇಂದ್ರ ಅವರೇ ಮುಂದಿನ ಚುನಾವಣೆಯ ಅಭ್ಯರ್ಥಿ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ನಮ್ಮ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡುತ್ತಾರೆ ಎಂದು ಹೇಳಿದರು.