ದಾವಣಗೆರೆ : ತಮ್ಮದೇ ಪಕ್ಷದ ನಾಯಕರ ವಿರುದ್ಧ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲಾದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ನಳೀನ್ ಕುಮಾರ್ ಕಟೀಲ್ ನಾಯಕತ್ವದಲ್ಲೇ ಬಿಜೆಪಿಗೆ ರಾಜ್ಯದಲ್ಲಿ ಹೀನಾಯ ಸೋಲಾಗಿದೆ. ಹೀಗಾಗಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ನೈತಿಕ ಹಕ್ಕಿಲ್ಲ, ಕೂಡಲೇ ರಾಜಿನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವುದಕ್ಕೆ ನಳೀನ್ ಕುಮಾರ್ ಕಟೀಲ್ ಗೆ ಆಗಲಿಲ್ಲ. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಬೇಡವೆಂದರೂ ಕಟೀಲ್ ಮತ್ತು ಇತರ ನಾಯಕರು ಕಿವಿಗೆ ಹಾಕಿಕೊಳ್ಳಲಿಲ್ಲ. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ, ದಿವಂಗತ ಅನಂತ ಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಲಾಯಿತು ಎಂದು ಅಸಮಾಧಾನ ಹೊರ ಹಾಕಿದರು.