ದಾವಣಗೆರೆ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಗ್ಯಾರಂಟಿಗಳ ವಿರುದ್ಧ ವಾಗ್ದಾಳಿ ನಡೆಸಿದರು.
ದಾವಣಗೆರೆಯ ಜಿಎಂಐಟಿ ಮೈದಾನದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಹಾ ಸಂಗಮ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ನವರು ಹಲವು ಗ್ಯಾರಂಟಿಗಳನ್ನು ಘೋಷಿಸಿದ್ದು ಇವುಗಳೆಲ್ಲ ಪೊಳ್ಳು ಭರವಸೆಗಳು ಎಂದು ಟೀಕಿಸಿದರು. ಮತ್ತೊಂದೆಡೆ ಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷರ ಕರ್ಮಭೂಮಿಯಲ್ಲಿ ಬಿಜೆಪಿಯ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯಾಗಿದ್ದಾರೆ. ಇದು ವಿಜಯ ಸಂಕಲ್ಪ ಯಾತ್ರೆಯ ಶುಭ ಸಂಕೇತ. ಕರ್ನಾಟಕದಲ್ಲಿ ಬಿಜೆಪಿ ವಿಜಯ ಯಾತ್ರೆ ಆರಂಭವಾಗಿದೆ ಎಂದರು. ಇದು ಹೀಗೆ ಮುಂದುವರೆಯಬೇಕು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ತಂದುಕೊಡುಲು ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಇನ್ನು ತ್ಯಾಗ, ತಪಸ್ಸಿನಿಂದ ತುಂಬಿರುವ ಜೀವನ ನಡೆಸುತ್ತಿರುವ ನಿಮ್ಮೆಲ್ಲರ ದರ್ಶನ ಮಾಡುವುದು ನನ್ನ ಸೌಭಾಗ್ಯ. ವಿಜಯ ಮಹೋತ್ಸವದಂತೆ ಈ ವಿಜಯ ಸಂಕಲ್ಪ ರ್ಯಾಲಿ ಕಾಣುತ್ತಿದೆ ಎಂದರು. ದೇಶಾದ್ಯಂತ 7 ಟೆಕ್ಸ್ ಟೈಲ್ಸ್ ಹಬ್ ನಿರ್ಮಾಣಗೊಳ್ಳುತ್ತಿದೆ. ಅದರಲ್ಲಿ ಒಂದು ದಾವಣಗೆರೆಯಲ್ಲಿ ಇದೆ. ಇದು ಹಲವು ಉದ್ಯೋಗ ಅವಕಾಶಗಳನ್ನು ಹೆಚ್ಚಿಸುತ್ತಿದೆ. ಈ ಮೂಲಕ ಯುವಕರಿಗೆ ಉದ್ಯೋಗದ ಅವಕಾಶಗಳು ಸಿಗಲಿವೆ. ಜಗತ್ತಿನಾದ್ಯಂತ ಭಾರತಕ್ಕೆ ಜೈಕಾರ ಹಾಕುತ್ತಿದ್ದಾರೆ. ಇದು ಕೇವಲ ಮೋದಿಯ ಕಾರಣಕ್ಕೆ ಅಲ್ಲ. ನೀವೆಲ್ಲರೂ ಮತ ನೀಡಿದ ಕಾರಣಕ್ಕೆ ಎಂದರು.